ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಸ್ವಾತಂತ್ರ್ಯದ ಅಮೃತ ಮೌಲ್ಯಗಳನ್ನು ಸ್ಮರಿಸುವ 80ನೇ ಸ್ವಾತಂತ್ರ್ಯೋತ್ಸವವನ್ನು ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ ಆವರಣದಲ್ಲಿ ಅತ್ಯಂತ ಸಂಭ್ರಮ, ಶಿಸ್ತು ಹಾಗೂ ವೈಭವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಹಾಗೂ ಐಶ್ವರ್ಯ ಕನ್ಸ್ಟ್ರಕ್ಷನ್ಸ್ನ ಮಾಲಕರಾದ ಶ್ರೀಯುತ ರವಿಶಂಕರ್ ಭಟ್ ಅವರು ರಾಷ್ಟ್ರಧ್ವಜವನ್ನು ಆರೋಹಣಗೊಳಿಸಿ, ಧ್ವಜವಂದನೆ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನಗೈದ ಮಹನೀಯರ ಆದರ್ಶಗಳು ಹಾಗೂ ಯುವಜನತೆಯ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯ ಕುರಿತು ಅರ್ಥಪೂರ್ಣ ಸಂದೇಶ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿಯ ಸದಸ್ಯರು, ವಿವಿಧ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ರಾಷ್ಟ್ರಭಕ್ತಿಯ ಭಾವವನ್ನು ಮೂಡಿಸುವಂತೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ‘ವಂದೇ ಮಾತರಂ’ ಗಾಯನವನ್ನು ಮನಮೋಹಕವಾಗಿ ಪ್ರಸ್ತುತಪಡಿಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಹಾಗೂ ವಂದನೆಯನ್ನು ಸಲ್ಲಿಸಿದರು. ವಿದ್ಯಾರ್ಥಿಗಳ ದೇಶಭಕ್ತಿ ಗೀತೆಗಳು ಇಡೀ ವಾತಾವರಣದಲ್ಲಿ ರಾಷ್ಟ್ರಪ್ರೇಮದ ಭಾವವನ್ನು ಉದ್ದೀಪನಗೊಳಿಸಿದವು.
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಅತಿಥಿಗಳು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನ್ ಭಾಗ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆಯಾದ ಡಾ/ ಶೋಭಿತಾ ಸತೀಶ್ ಅವರು ವಂದಿಸಿದರು
ಸಮಾರಂಭದ ನಿರೂಪಣೆಯನ್ನು ಶಿಕ್ಷಕಿಯರಾದ ಸೌಮ್ಯಕುಮಾರಿ ಹಾಗೂ ಯಶೋಧ ಅವರು ನಿರ್ವಹಿಸಿದರು . ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ನಡೆಯಿತು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಸೈನಿಕರ ಸೇವೆ ಹಾಗೂ ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಸ್ಮರಿಸುತ್ತಾ ನಡೆದ ಈ ಸ್ವಾತಂತ್ರ್ಯೋತ್ಸವವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು, ಕರ್ತವ್ಯಪ್ರಜ್ಞೆ ಹಾಗೂ ರಾಷ್ಟ್ರದ ಬಗ್ಗೆ ಹೆಮ್ಮೆಯ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಿತು. ರಾಷ್ಟ್ರಪ್ರೇಮದ ಸಂದೇಶವನ್ನು ಸಾರಿದ ಈ ಅರ್ಥಪೂರ್ಣ ಸಮಾರಂಭವು ಎಲ್ಲರ ಮನದಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿ ಯಶಸ್ವಿಯಾಗಿ ಸಂಪನ್ನಗೊಂಡಿತು.